ಪುನೀತ್ ಅಮರರಾದ ನಂತರ ಅವರ ಹೆಸರನ್ನ ಚಿರಸ್ಥಾಯಿಯಾಗಿಸಲು ಹಲವು ಕೆಲಸಗಳು ಕರ್ನಾಟಕದಲ್ಲಿ ನಡೆಯುತ್ತಿವೆ. ಅಪ್ಪು ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಅವರ ಹೆಸರನ್ನ ಅಮರವಾಗಿಸಿದೆ. ಅದೇ ರೀತಿ ಅಂಬರೀಶ್ ಅವರಿಗೂ ಇಂಥಹ ಗೌರವಗಳನ್ನ ಕೊಡಬೇಕು ಎಂದು ಅಂಬಿ ಅಭಿಮಾನಿಗಳು ಬೇಡಿಕೆ ಇಡುತ್ತಿದ್ದಾರೆ. ಬೀದಿಗಿಳಿದು ಹೋರಾಟ ಮಾಡುವ ಬಗ್ಗೆ ಎಚ್ಚರಿಸಿದ್ದಾರೆ, ಇದು ಸುಮಲತ ಅಂಬರೀಶ್ ಅವರ ಗಮನಕ್ಕೆ ಬಂದಿದ್ದು ಬೇಸರ ವ್ಯಕ್ತ ಪಡಿಸಿ ಪತ್ರ ಬರೆದಿದ್ದಾರೆ.
ನನ್ನ ಮನವಿ
ನಮ್ಮ ಪ್ರೀತಿಯ ಡಾ|| ಅಂಬರೀಶ್ ಅವರನ್ನು ಆರಾಧ್ಯ ದೈವದಂತೆ ಪ್ರೀತಿಸಿ, ಅವರ ನೆನಪನ್ನು ಚಿರಸ್ಥಾಯಿಯಾಗಿ ಬೆಳಗಿಸುತ್ತಿರುವ ನೆಚ್ಚಿನ ಅಭಿಮಾನಿ ಸಂಘಗಳು ಹಾಗೂ ಇನ್ನಿತರ ಸಂಘಟನೆಗಳು ಇಂದು ಅಂಬರೀಶ್ ಅವರ ಸ್ಮಾರಕ ಅಭಿವೃದ್ಧಿಗೊಳಸುವುದು, ಅವರ ಹೆಸರಿನಲ್ಲಿ ರಸ್ತೆಗಳನ್ನು ನಾಮಕರಣ ಮಾಡುವುದು ಮತ್ತು ಇನ್ನಿತರ ಬೇಡಿಕೆಗಳನ್ನು ಒತ್ತಾಯಿಸಿ ಹೋರಾಟ ಮಾಡುವುದಾಗಿ ಹೇಳಿರುವುದು ಸಾಮಾಜಿಕ ಜಾಲತಾಣಗಳ ಮೂಲಕ ನನ್ನ ಗಮನಕ್ಕೆ ಬಂದಿದೆ.
ನಮ್ಮ ಕುಟುಂಬದೊಂದ್ಧಗೆ ಅತಿ ಹೆಚ್ಚು ಒಡನಾಟ ಹೊಂದಿದ್ದ ಹಾಗೂ ನಮ್ಮ ಮನೆ ಮಗನಂತಿದ್ದ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡಿರುವ ಆಘಾತಕಾರಿ ಘಟನೆಯಿಂದ ನನಗಾಗಿರುವ ನೋವನ್ನು ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ.
ಇದರೊಂದಿಗೆ ಚಿತ್ರರಂಗ, ಅಭಿಮಾನಿಗಳು, ಹಾಗೂ ಕರ್ನಾಟಕ ರಾಜ್ಯದ ಜನತೆಗೆ ತುಂಬಲಾರದಂತ ನಷ್ಟ ಉಂಟಾಗಿದ್ದು, ಈ ಸಮಯದಲ್ಲಿ ತಾವುಗಳು ಹೋರಾಟ ಮಾಡುವ ನಿರ್ಧಾರ ಮಾಡಿರುವುದು ಎಲ್ಲರ ಹೃದಯದ ಮೇಲೆ ಆಗಿರುವ ಗಾಯದ ಮೇಲೆ ಬರೆ ಎಳೆದಂತೆ ಆಗುತ್ತದೆ. ಆದುದರಿಂದ, ಈ ಸಮಯದಲ್ಲಿ ಈ ವಿಷಯ ಪ್ರಸ್ತಾಪಿಸುವುದು ಸಮಂಜಸವಲ್ಲ.
ನಿಮ್ಮ ಭಾವನೆಗಳನ್ನು ನಾನು ಗೌರವಿಸುತ್ತೇನೆ, ಆದರೆ ಪ್ರಸ್ತುತ ಸಂದರ್ಭದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುವುದರಿಂದ ಅಂಬರೀಷ್ ಅವರ ಘನತೆ ಹಾಗೂ ಗೌರವಕ್ಕೆ ಧಕ್ಕೆಯಾಗುತ್ತದೆ. ಯಾವುದೇ ಪ್ರಶಸ್ತಿಯಾದರು ಕೇಳಿ ಪಡೆಯುವುದು ಅತಿಶಯೋಕ್ತಿಯಾಗಬಾರದು.
ಎಲ್ಲಾ ಪ್ರಶಸ್ತಿಗಳನ್ನು ಮೀರಿದಂತ ಪ್ರೀತಿ ಮತ್ತು ಅಭಿಮಾನವನ್ನು ನೀವುಗಳು ನಮ್ಮ ಕುಟುಂಬಕ್ಕೆ ನೀಡಿದ್ದೀರಿ. ಅಂಬರೀಷ್ ಅವರು ತಮ್ಮ ಜೀವನದಲ್ಲಿ ಯಾವ ಪ್ರಶಸ್ತಿ, ಹುದ್ದೆ ಅಥವಾ ಸನ್ಮಾನವನ್ನು ಬಯಸಿದವರಲ್ಲ. ಹೀಗಾಗಿ ಅಂಬರೀಷ್ ಅವರ ಅಭಿಮಾನಿಗಳಾಗಿ ತಾವುಗಳು ಸಹ ಅವರ ಹಾದಿಯಲ್ಲಿ ನಡೆಯಬೇಕು ಎನ್ನುವುದು ನನ್ನ ಆಶಯ. ಆದುದರಿಂದ, ಈ ಸಮಯದಲ್ಲಿ ಪ್ರಶಸ್ತಿ ಕೋರಿ ಹೋರಾಟ ಅಥವಾ ಪ್ರತಿಭಟನೆ ನಡೆಸುವುದು ಅಂಬರೀಷ್ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ವಿಷಯವಾಗಿದೆ.
ಆದುದರಿಂದ, ತಮ್ಮೆಲ್ಲರ ಅಭಿಮಾನ ಮತ್ತು ಪ್ರೀತಿ-ವಾತ್ಸಲ್ಯಗಳನ್ನು ಗೌರವಿಸುತ್ತ, ಹಾಗೂ ನಿಮ್ಮೆಲ್ಲರ ಆಸೆಯನ್ನು ಮುಂದಿನ ದಿನಗಳಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಈಡೇರಿಸುತ್ತದೆ ಎಂದು ಮಾನ್ಯ ಮುಖ್ಯಮಂತ್ರಿಗಳ ಮೇಲೆ ಭರವಸೆಯನ್ನು ಇಡುತ್ತಾ, ತಾವು ತೆಗೆದುಕೊಂಡಿರುವ ಈ ಹೋರಾಟದ ನಿರ್ಧಾರವನ್ನು ಹಿಂಪಡೆದು ನವೆಂಬರ್ 24ನೇ ತಾರೀಕಿನಂದು ಅಂಬರೀಷ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆಯನ್ನು ಶಾಂತಿಯುತವಾಗಿ ನೆರವೇರಿಸುವ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರೋಣ ಎಂದು ತಮ್ಮಲ್ಲಿ ಕಳಕಳಿಯಿಂದ ಪ್ರಾರ್ಥಿಸುತ್ತೇನೆ.
ವಂದನೆಗಳೊಂದಿಗೆ
ತಮ್ಮ ವಿಶ್ವಾಸಿ
(ಸುಮಲತಾ ಅಂಬರೀಷ್)a