ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್ರವರ ಜಂಟಿ ನಿರ್ಮಾಣದಲ್ಲಿ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ ಚಿತ್ರ “ಪದವಿಪೂರ್ವ” ಚಿತ್ರಕ್ಕೆ ಬಿಗ್ ಬಾಸ್ ಖ್ಯಾತಿಯ ನಟಿ ‘ದಿವ್ಯ ಉರುಡುಗ’ ಪ್ರವೇಶ ಪಡೆದುಕೊಂಡಿದ್ದಾರೆ. ದಿವ್ಯ ಅವರು ಚಿತ್ರದಲ್ಲಿ ಅತಿಥಿ ಪಾತ್ರವೊಂದನ್ನು ನಿರ್ವಹಿಸುತ್ತಿದ್ದು, ಭಟ್ಟರ ತಂಡ ಸೇರಿದ್ದು ಅತ್ಯಂತ ಖುಷಿಯ ವಿಷಯ ಎಂದು ಅಭಿಪ್ರಾಯ ಪಟ್ಟಿದ್ದಾರೆ. ದಿವ್ಯ ನಟಿಸಲಿರುವ ಭಾಗದ ಚಿತ್ರೀಕರಣವು ಬೆಂಗಳೂರು ಹಾಗು ಮಂಗಳೂರಿನ ಸುತ್ತಮುತ್ತ ಶೀಘ್ರದಲ್ಲೇ ಶುರು ಆಗಲಿದ್ದು, ಚಿತ್ರದ ಐದನೇ ಹಂತದ ಚಿತ್ರೀಕರಣಕ್ಕೆ ಚಿತ್ರತಂಡ ಸಕಲ ಸಿದ್ಧತೆ ನಡೆಸಿದೆ.
ಚಿತ್ರದ ನಾಲ್ಕನೇ ಹಂತದ ಚಿತ್ರೀಕರಣವು ಕಳೆದ ತಿಂಗಳಷ್ಷೇ ಪೂರ್ಣಗೊಂಡಿದ್ದು, ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಸಿದ ಚಿತ್ರೀಕರಣದ ದೃಶ್ಯಗಳು ಅತ್ಯಂತ ಸೊಗಸಾಗಿ ಮೂಡಿಬಂದಿದೆ ಎಂದು ಚಿತ್ರ ನಿರ್ದೇಶಕ ಹರಿಪ್ರಸಾದ್ ಜಯಣ್ಣ ಸಂತೋಷ ವ್ಯಕ್ತಪಡಿಸಿದ್ದಾರೆ. ಹೊಸಬರ ದಂಡೇ ಇರುವ ಈ ಚಿತ್ರಕ್ಕೆ ಯುವ ಪ್ರತಿಭೆ ಪೃಥ್ವಿ ಶಾಮನೂರು ನಾಯಕನಾದರೆ, ಅಂಜಲಿ ಅನೀಶ್ ಮತ್ತು ಯಶ ಶಿವಕುಮಾರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಪದವಿಪೂರ್ವ ಚಿತ್ರಕ್ಕಾಗಿ ಅರ್ಜುನ್ ಜನ್ಯ ಸಂಯೋಜಿಸಿರುವ ರಾಗಗಳಿಗೆ ಕನ್ನಡ ಶೋತೃಗಳ ನಿಕಟಕವಿ ಯೋಗರಾಜ್ ಭಟ್ ಸಾಹಿತ್ಯ ರಚಿಸಿದರೆ, ಖ್ಯಾತ ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ಕಣ್ಚಳಕ ಹಾಗು ಮಧು ತುಂಬಕೆರೆಯ ಸಂಕಲನದ ಕೈಚಳಕ ಚಿತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸಿದೆ.