Raju Srivastava : ಚೇತರಿಸಿಕೊಂಡ ರಾಜು ಶ್ರೀವಾಸ್ತವ
ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ ಕಳೆದ ಮೂರು ದಿನಗಳಿಂದ ಹೃದಯಾಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಶೀಘ್ರವೇ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. ಈ ನಡುವೆ ಅವರ ಆರೋಗ್ಯದ ಬಗ್ಗೆ ಕೊಂಚ ಸಿಹಿ ಸುದ್ದಿಯೊಂದು ಬಂದಿದೆ. ಕಳೆದ ಎರಡು ದಿನಗಳಿಂದ ಅವರ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ. ಆದರೆ ಮೂರನೇ ದಿನ ಅವರ ದೇಹದಲ್ಲಿ ಚಲನೆ ಕಂಡುಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಅವರ ಪತ್ನಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿ ರಾಜು ಅವರ ಆರೋಗ್ಯ ಸ್ಥಿತಿ ಬಗ್ಗೆ ತಿಳಿದುಕೊಂಡಿದ್ದಾರೆ. ಪ್ರಧಾನಿ ಮೋದಿ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ರಾಜು ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇಟ್ಟಿದ್ದಾರೆ.
ಹಾಸ್ಯನಟ ರಾಜು ಶ್ರೀವಾತ್ಸವ್ ಅವರ ಪತ್ನಿಗೆ ಕರೆ ಮಾಡಿ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್, ಅಗತ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಅವರ ಕುಟುಂಬಕ್ಕೆ ಸಂಪೂರ್ಣ ನೆರವು ನೀಡಬೇಕು ಎಂದು ಸಿಎಂ ಯೋಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ದೆಹಲಿಯ ಹೋಟೆಲ್ನಲ್ಲಿ ವರ್ಕೌಟ್ ಮಾಡುವಾಗ ರಾಜು ಅವರಿಗೆ ಹೃದಯಾಘಾತವಾಗಿತ್ತು. ಇದ್ದಕ್ಕಿದ್ದಂತೆ ಟ್ರೆಡ್ಮಿಲ್ನಿಂದ ಕುಸಿದು ಬಿದ್ದ ತಕ್ಷಣ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಜು ಶ್ರೀವಾಸ್ತವ ಅವರು ಹೃದಯಾಘಾತದ ನಂತರ ಮೂರನೇ ಬಾರಿಗೆ ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದಾರೆ. ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ 10 ವರ್ಷಗಳ ಹಿಂದೆ ಮೊದಲ ಬಾರಿಗೆ ಅವರ ಆಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಇದಾದ ನಂತರ ಏಳು ವರ್ಷಗಳ ಹಿಂದೆ ಲೀಲಾವತಿ ಆಸ್ಪತ್ರೆಯಲ್ಲಿ ಎರಡನೇ ಬಾರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿತ್ತು.